ಕೋಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಇಬ್ಬರು ವ್ಯಕ್ತಿಗಳಿಗೆ ಕೋವಿಡ್ ವೈರಸ್ ಸೋಂಕಿರುವುದು ದೃಢಪಟ್ಟಿದೆ ಎಂದು ಸಚಿವ ಕೆ.ಟಿ ಜಲೀಲ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಇದರಿಂದ ರಕ್ಷಣಾ ಕಾರ್ಯದಲ್ಲಿ ತೊಡಗಿರುವವರೆಲ್ಲರೂ ಕೋವಿಡ್-19 ಹಿನ್ನೆಲೆಯಲ್ಲಿ ಕ್ವಾರಂಟೈನ್ ಗೆ ಒಳಪಡಬೇಕು ಎಂದು ಕೇರಳ ಸರ್ಕಾರ ಸೂಚಿಸಿದೆ.
ವಿಮಾನದಲ್ಲಿ ಪ್ರಯಾಣಿಸಿದ ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ. ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಎಲ್ಲ ಸಿಬ್ಬಂದಿಯನ್ನೂ ಕ್ವಾರಂಟೈನ್ಗೆ ಒಳಪಡಿಸಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲು ಸ್ಥಳಕ್ಕೆ ತಲುಪಿದ್ದಾರೆ. ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ದುಬೈನಿಂದ ಬಂದು ಕೇರಳದ ಕೋಯಿಕ್ಕೋಡ್ ಬಳಿಯ ಕರಿಪುರ ವಿಮಾನ ನಿಲ್ದಾಣದಲ್ಲಿ ಪತನವಾದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 190 ಪ್ರಯಾಣಿಕರಿದ್ದರು. ಇವರಲ್ಲಿ ಈಗಾಗಲೇ 20 ಮಂದಿ ಮೃತಪಟ್ಟಿದ್ದು ಇಬ್ಬರಿಗೆ ಕೋವಿಡ್ ವೈರಸ್ ತಗುಲಿರುವುದು ದೃಢಪಟ್ಟಿದೆ.