ಅರಣ್ಯ ಯೋಜನೆಗಳಿಗೆ ಅನುದಾನ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ಅರಣ್ಯ ಸಚಿವ ಖಂಡ್ರೆ ಆಗ್ರಹ

ಹುಲಿ ಯೋಜನೆಯಡಿ ಕರ್ನಾಟಕಕ್ಕೆ ಬಾಕಿ ಇರುವ 30 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡುವಂತೆ ಅರಣ್ಯ ಸಚಿವ ಈಶ್ವರ್​ ಖಂಡ್ರೆ ಅವರು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದ್ರ ಯಾದವ್​ ಅವರಿಗೆ ಆಗ್ರಹಿಸಿದ್ದಾರೆ.

ಇವತ್ತು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಅರಣ್ಯ ಸಚಿವ ಈಶ್ವರ್​ ಖಂಡ್ರೆ ಭೇಟಿಯಾದರು.

ಕೇಂದ್ರ ಪ್ರಾಯೋಜಿತ ಹುಲಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2022-23ನೇ ಸಾಲಿನಲ್ಲಿ ಮಂಜೂರಾದ ಸುಮಾರು 60 ಕೋಟಿ ರೂ. ಪೈಕಿ 30 ಕೋಟಿ ರೂಪಾಯಿ ಬಾಕಿ ಬರಬೇಕಿದ್ದು, ಕೂಡಲೇ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವರಾದ ಭೂಪೇಂದ್ರ ಯಾದವ್ ಅವರಿಗೆ ಮನವಿ ಮಾಡಿದರು.

ಹುಲಿ ಯೋಜನೆಯಡಿ ಕಾಳಿ, ಭದ್ರಾ, ನಾಗರಹೊಳೆ, ಬಂಡಿಪುರ ಮತ್ತು ಬಿಳಿಗಿರಿ ರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಹೊಸ ಕಾಮಗಾರಿಗಳನ್ನು ಕೈಗೊಳ್ಳಲು 61 ಕೋಟಿ ರೂಪಾಯಿ ಸೇರಿ ಒಟ್ಟಾರೆ ಸುಮಾರು 91.99 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಕೋರಿದ್ದು, ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್​ ಖಂಡ್ರೆ ಹೇಳಿದ್ದಾರೆ.

ಅರಣ್ಯ ರಕ್ಷಣೆ ಮತ್ತು ವಿಸ್ತರಣೆಗಾಗಿ ಕಾಂಪಾ ನಿಧಿಯಡಿ 2023-24ರ ಸಾಲಿನಲ್ಲಿ ರಾಜ್ಯದಿಂದ ಸುಮಾರು 362 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 140 ಕೋಟಿ ರೂ.ಗೆ ಮಾತ್ರ ಮಂಜೂರಾತಿ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಉಳಿದ 222 ಕೋಟಿ ಬಾಕಿ ನಿಧಿಯ ಮಂಜೂರಾತಿಗೂ ಮನವಿ ಮಾಡಲಾಗಿದ್ದು, ಇದಕ್ಕೆ ಅಗತ್ಯವಾದ ಎಲ್ಲ ನಿಬಂಧನೆಗಳನ್ನೂ ಪೂರೈಸಲಾಗುವುದು ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.

ನಗರ -ವನ ಯೋಜನೆ ಅಡಿ ರಾಜ್ಯದ 9 ನಗರಗಳಿಗಾಗಿ 26 ಕೋಟಿ 70 ಲಕ್ಷ ಯೋಜನೆ ಅನುಮೋದನೆ ನೀಡುವಂತೆಯೂ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದ್ದು, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಈಶ್ವರ್​ ಖಂಡ್ರೆ ಅವರು ಹೇಳಿದ್ದಾರೆ.