ಗುಜರಾತ್ನ ಖೇದ್ಬ್ರಹ್ಮ ಕ್ಷೇತ್ರದ ಶಾಸಕ ಅಶ್ವಿನ್ ಕೊತ್ವಾಲ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಆಡಳಿತಾರೂಢ ಬಿಜೆಪಿ ಪಕ್ಷವನ್ನು ಸೇರಿದ್ದಾರೆ. ಅಲ್ಲದೇ, ತಮ್ಮ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಕಾರ್ಯವೈಖರಿ ನನಗೆ ಸಂತೋಷ ನೀಡಿಲ್ಲ. ಜನಸಾಮಾನ್ಯರಲ್ಲಿ ಜನಪ್ರಿಯವಾಗಿರುವವರಿಗೆ ಟಿಕೆಟ್ ನೀಡುವ ಬದಲು, ಪಕ್ಷದ ನಾಯಕತ್ವವು ಅವರಿಗೆ ನಿಷ್ಠರಾಗಿರುವವರಿಗೆ ಮಾತ್ರ ಆದ್ಯತೆ ನೀಡುತ್ತಿತ್ತು. ಭವಿಷ್ಯದಲ್ಲಿ ನನಗೆ ಟಿಕೆಟ್ ನಿರಾಕರಿಸಬಹುದು ಎಂಬ ಭಯ ನನಗಿದೆ. ಈ ಕಾರಣದಿಂದ ನಾನು ಬಿಜೆಪಿ ಸೇರುತ್ತಿದ್ದೇನೆ ಎಂದು ಹೇಳಿದರು.
ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಗುಜರಾತ್ನ ಬುಡಕಟ್ಟು ಪ್ರದೇಶಗಳು ಅಭಿವೃದ್ಧಿ ಕಂಡಿವೆ ಎಂದು ನಾನು ಬಲವಾಗಿ ನಂಬುತ್ತೇನೆ. ಆದ್ದರಿಂದ ನಾನು ಬಿಜೆಪಿಗೆ ಸೇರಿದ್ದೇನೆ ಎಂದು ಅಶ್ವಿನ್ ತಿಳಿಸಿದರು. ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರಿದರು.
ಈ ವರ್ಷಾಂತ್ಯದಲ್ಲಿ ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು, ಅಶ್ವಿನ್ ಅವರ ಈ ನಡೆ ಕಾಂಗ್ರೆಸ್ ಪಕ್ಷಕ್ಕೆ ಆಘಾತ ನೀಡಿದೆ. ಅಶ್ವಿನ್ ಅವರು ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಒಟ್ಟು ಮೂರು ಬಾರಿ ಶಾಸಕರಾಗಿ ಆರಿಸಿ ಬಂದಿದ್ದರು.