ADVERTISEMENT
ಹಾಸನ ನಗರ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಹಂಚಿಕೆ ಸಂಬಂಧ ಜೆಡಿಎಸ್ನಲ್ಲಿ ಸಂಘರ್ಷ ತಾರಕ್ಕೇರಿದೆ.
ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕರೆದಿದ್ದ ಹಾಸನ ಜಿಲ್ಲೆ ಮತ್ತು ನಗರದ ಪಕ್ಷದ ಮುಖಂಡರ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದೆ.
ಕುಮಾರಸ್ವಾಮಿ ಅವರು ಕರೆದಿದ್ದ ಸಭೆಯನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ರದ್ದಗೊಳಿಸುವ ಮೂಲಕ ಹಾಸನ ಟಿಕೆಟ್ ಹಂಚಿಕೆ ವಿಷಯದಲ್ಲಿ ಮಧ್ಯಪ್ರವೇಶ ಮಾಡಿದ್ದಾರೆ.
ನಾಳೆ ಬೆಳಗ್ಗೆ ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಮುಖ್ಯ ಕಚೇರಿ ಜೆ ಪಿ ಭವನದಲ್ಲಿ ಮಾಜಿ ಸಿಎಂ ಹೆಚ್ಡಿಕೆ ಅವರು ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಹಾಸನ ನಗರ ಸಭೆ ಸದಸ್ಯರ ಮತ್ತು ಪಕ್ಷದ ಮುಖಂಡರ ಸಭೆಯನ್ನು ಕರೆಯಲಾಗಿತ್ತು.
ಈ ಸಭೆಯನ್ನು ಮುಂದೂಡಲಾಗಿದೆ ಎಂದು ಜೆಡಿಎಸ್ ಪಕ್ಷದ ಮುಖ್ಯ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಾಸನ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಹೆಚ್ ಪಿ ಸ್ವರೂಪ್ ಅವರ ಪರವಾಗಿ ಅಭಿಪ್ರಾಯ ಮೂಡಿಸುವ ಸಲುವಾಗಿ ಹೆಚ್ಡಿಕೆ ಅವರು ಸಭೆ ಕರೆದಿದ್ದರು.
ಆದರೆ ಹೆಚ್ಡಿಕೆ ಮತ್ತು ರೇವಣ್ಣ ಕುಟುಂಬದ ನಡುವೆ ಸಂಘರ್ಷ ತಾರಕ್ಕೇರಿರುವ ಹಿನ್ನೆಲೆಯಲ್ಲಿ ದೇವೇಗೌಡರೇ ನಾಳೆಯ ಸಭೆಯನ್ನು ರದ್ದುಗೊಳಿಸಿದ್ದಾರೆ.
ADVERTISEMENT