ಗೌಡರ ಕುಟುಂಬದ ಕುಡಿ, ನಿಖಿಲ್ ಕುಮಾರಸ್ವಾಮಿ ಅಧಿಕೃತವಾಗಿ ವಿಧಾನಸಭಾ ಚುನಾವಣಾ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ.
ರಾಮನಗರ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯಲಿದ್ದಾರೆ. ಈ ಮೂಲಕ ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ತಮ್ಮ ಪುತ್ರನಿಗೆ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ.
ರಾಮನಗರದಿಂದ ತಮ್ಮ ಬದಲು ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಸ್ವತಃ ಅನಿತಾ ಕುಮಾರಸ್ವಾಮಿ ಅವರೇ ಘೋಷಣೆ ಮಾಡಿದ್ದರು.
ಈ ಮೂಲಕ ನಿಖಿಲ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸ್ತಾರೋ ಇಲ್ಲವೋ, ಸ್ಪರ್ಧಿಸುವುದಾದರೆ ಎಲ್ಲಿಂದ ಸ್ಪರ್ಧೆ ಮಾಡ್ತಾರೆ ಎಂಬ ಗೊಂದಲ ಕೊನೆಯಾಗಿದೆ.
2018ರ ಚುನಾವಣೆಯಲ್ಲಿ ಕುಮಾರಸ್ವಾಮಿ ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರದಿಂದ ಗೆದ್ದ ಬಳಿಕ ರಾಮನಗರ ಕ್ಷೇತ್ರಕ್ಕೆ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದರು. ಆ ಬಳಿಕ ನಡೆದ ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಕಾಂಗ್ರೆಸ್ ಸಹಕಾರದಿಂದ ಗೆದ್ದು ಶಾಸಕಿ ಆದರು.